ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಮಂಗಳವಾರ, ಆಗಸ್ಟ್ 10, 2010

ಮೂಢ ಉವಾಚ -2

ಲೋಭ
ಸ್ನೇಹ ಪ್ರೀತಿಯಲು ಲಾಭವನೆ ಅರಸುವರು 
ಕಿಂಚಿತ್ತು ಪಡೆಯಲು ಶಾಶ್ವತವ ಕಳೆಯುವರು |
ವಿಶ್ವಾಸದಮೃತಕೆ ವಿಷವ ಬೆರೆಸುವರಿಹರು 
ಇಂಥವರ ಸಂಗದಿಂ ದೂರವಿರು ಮೂಢ||

ನಾನತ್ವ
ತಾವೆ ಮೇಲೆಂಬರು ಇತರರನು ಹಳಿಯುವರು 
ಪರರೇಳಿಗೆಯ ಸಹಿಸರು ಕಟುಕಿ ಮಾತಾಡುವರು |
ಅರಿಯರವರು ಇತರರಿಗೆ ಬಯಸುವ ಕೇಡದು 
ಎರಡಾಗಿ ಬಂದೆರಗುವುದೆಂಬುದನು ಎಲೆ ಮೂಢ ||

ಬಯಕೆ
ಬಯಕೆಗೆ ಕೊನೆಯಿಲ್ಲ ಬಯಕೆಗೆ ಮಿತಿಯಿಲ್ಲ 
ಬಯಕೆ ಬೀಜಾಸುರನ ಸಂತತಿಗೆ ಸಾವಿಲ್ಲ |
ಬಯಕೆ ಜೀವನವು ಬಯಸುವುದು ತಪ್ಪಲ್ಲ 
ಸ್ವಬಲವೇ ಹಂಬಲಕೆ ಬೆಂಬಲವು ಮೂಢ ||
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ