ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಆಗಸ್ಟ್ 15, 2010

ಮೂಢ ಉವಾಚ -3

ಏಕೆ ಹೀಗೆ?
ಅದರದು ಮನ ಕುಹಕಿಗಳ ಕುಟುಕಿಗೆ
ಬೆದರದು ತನು ಪಾತಕಿಗಳ ಧಮಕಿಗೆ|
ಮುದುಡುವುದು ಮನವು ಕದಡುವುದು
ಪ್ರಿಯರ ಹೀನೈಕೆಗೆ ಹೀಗೇಕೋ ಮೂಢ||

ಕೋಪ
ಅಡಿಗಡಿಗೆ ಕಾಡಿ ಶಿರನರವ ತೀಡಿ
ಮಿಡಿದಿಹುದು ಉಡಿಯೊಳಗಿನ ಕಿಡಿಯು|
ಗಡಿಬಿಡಿಯಡಲಡಿಯಿಡದೆ ತಡೆತಡೆದು
ಸಿಡಿನುಡಿಯ ನೀಡು ಸಿಹಿಯ ಮೂಢ||

ಯಶದ ಹಾದಿ
ಒಲವೀವುದು ಗೆಲುವು ಬಲವೀವುದು
ಜೊತೆಜೊತೆಗೆ ಮದವು ಮತ್ತೇರಿಸುವುದು|
ಸೋಲಿನವಮಾನ ಛಲ ಬೆಳೆಸುವುದು
ಯಶದ ಹಾದಿ ತೋರುವುದೋ ಮೂಢ|

ಬಿರುಕು
ಆತುರದ ಮಾತು ಮಾನ ಕಳೆಯುವುದು
ಕೋಪದ ನಡೆನುಡಿ ಸಂಬಂಧ ಕೆಡಿಸುವುದು|
ತಪ್ಪರಿತು ಒಪ್ಪಿದೊಡೆ ಬಿರುಕು ಮುಚ್ಚುವುದು
ಬಿರುಕು ಕಂದರವಾದೀತು ಜೋಕೆ ಮೂಢ||


-ಕ.ವೆಂ.ನಾಗರಾಜ್.

1 ಕಾಮೆಂಟ್‌:

  1. ಏಕೆ ಹೀಗೆ? : ಅಮಿತವಾದ ಪ್ರೀತಿಯ ವೈಫಲ್ಯಕ್ಕೆ ಮನವು ಹಾಗೆಯೇ
    ಕೋಪ : ಕೋಪಕ್ಕಿಂತ ಕೇಡಿನ ಸಂಗತಿ ಇನ್ನೊಂದಿಲ್ಲ.
    ಯಶದ ಹಾದಿ : ಯಶದ ಶ್ರುಂಗದಲ್ಲಿ ಮದವು ಮತ್ತೇರದಿದ್ದರೆ ಸಾಕು...
    ಬಿರುಕು : ಯಾವುದೇ ಸಂಬಂಧಕ್ಕೆ ಕಿವಿ ಮಾತು.

    ಪ್ರತ್ಯುತ್ತರಅಳಿಸಿ