ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಸೆಪ್ಟೆಂಬರ್ 12, 2010

ಮೂಢ ಉವಾಚ -6

ಅರಿವು
ಸೋತೆನೆಂದೆನಬೇಡ ಸೋಲು ನೀನರಿತೆ
ಬಿದ್ದೆನೆಂದೆನಬೇಡ ನೋವು ನೀನರಿತೆ
ಸೋಲರಿತು ನೋವರಿತು ಹಸಿವರಿತು
ಜಗವರಿಯೆ ನೀನೇ ಗೆಲುವೆ ಮೂಢ

ಕೊಂಬೆ
ರಸಭರಿತ ಫಲಮೂಲ ಕೊಂಬೆ ತಾನಲ್ಲ
ಫಲಸತ್ವ ಸಾಗಿಪ ಮಾರ್ಗ ತಾನಹುದು
ಮಾಡಿದೆನೆನಬೇಡ ನಿನ್ನದೆನಬೇಡ
ಜಗವೃಕ್ಷರಸ ಹರಿವ ಕೊಂಬೆ ನೀನು ಮೂಢ

ಯಾರು?
ಕೆಲಸವಿರೆ ಓಲೈಸುವರು ಇಲ್ಲದಿರೆ ಹೀನೈಸುವರು
ಎಲ್ಲರ ಸೇವೆ ಬಯಸುವರು ತಾನಾರಿಗೂ ಆಗರು
ಕಂಡರೂ ಕಾಣದೊಲು ನಟಿಸುವ ಚತುರರಿವರು
ಇವರೊಳು ನೀಯಾರು ನಾಯಾರು ಹೇಳು ಮೂಢ

ಯಾರು?
ಆಪತ್ತಿಗಾಗುವರಿಹರು ತಿರುಗಿ ನೋಡದವರಿಹರು
ಒಳಿತು ಹಾರೈಸುವರಿಹರು ಕೆಡಕು ಬಯಸುವರಿಹರು
ಒಳಿತು ಮಾಡದ ಕೆಡಕು ಎಣಿಸಲರಿಯರಿಹರು
ಇವರೊಳು ನೀಯಾರು ನಾಯಾರು ಹೇಳು ಮೂಢ
*************
-ಕವಿನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ