ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಭಾನುವಾರ, ಅಕ್ಟೋಬರ್ 3, 2010

ಮೂಢ ಉವಾಚ -19

ಮದಭರಿತ ಮನುಜನ ಪರಿಯೆಂತು ನೋಡು
ನಡೆಯುವಾ ಗತ್ತು ನುಡಿಯುವಾ ಗಮ್ಮತ್ತು|
ಮೇಲರಿಮೆಯಾ ಭೂತ ಅಡರಿಕೊಂಡಿಹುದು
ಭೂತಕಾಟವೇ ಬೇಡ ದೂರವಿರು ಮೂಢ||


ಕಣ್ಣೆತ್ತಿ ನೋಡರು ಪರರ ನುಡಿಗಳನಾಲಿಸರು
ದರ್ಪದಿಂ ವರ್ತಿಸುತ ಕೊಬ್ಬಿ ಮೆರೆಯುವರು|
ಮೂಲೋಕದೊಡೆಯರೇ ತಾವೆಂದು ಭಾವಿಸುತ
ಮದೋನ್ಮತ್ತರೋಲಾಡುವರು ಮೂಢ||


ಮದೋನ್ಮತ್ತನಾ ಮಹಿಮೆಯನೆಂತು ಬಣ್ಣಿಸಲಿ?
ಉದ್ಧಟತನವೆ ಮೈವೆತ್ತು ದರ್ಪದಿಂ ದಿಟ್ಟಿಸುವ|
ಎದುರು ಬಂದವರ ಕಡೆಗಣಿಸಿ ತುಳಿಯುವ
ಮದಾಂಧನದೆಂತ ಠೇಂಕಾರ ನೋಡು ಮೂಢ||


ಮದಸೊಕ್ಕಿ ಮೆರೆದವರೊಡನಾಡಬಹುದೆ?
ನಯ ವಿನಯ ಸನ್ನಡತೆಗವಕಾಶ ಕೊಡದೆ|
ವಿಕಟನರ್ತನಗೈವ ಮದವದವನತಿ ತರದೆ?|
ನರಾರಿ ಮದದೀಪರಿಯ ನೀನರಿ ಮೂಢ||
**************
-ಕವಿನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ