ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಡಿಸೆಂಬರ್ 3, 2014

ವಾನಪ್ರಸ್ಥವೆಂದರೆ . . . 2

ಹಿಂದಿನ ಲೇಖನಕ್ಕೆ ಲಿಂಕ್: ವಾನಪ್ರಸ್ಥವೆಂದರೆ . . . 1

     ಗೃಹಸ್ಥಾಶ್ರಮವು ಸಮಾಜದ ತಳಪಾಯವಿದ್ದಂತೆ. ಇತರ ಮೂರು ಆಶ್ರಮಗಳಿಗೆ ತಾಯಿಬೇರು ಇದೇ ಆಗಿದೆ. ಮಕ್ಕಳು ಬ್ರಹ್ಮಚಾರಿಗಳಾಗುತ್ತಾರೆ, ಪೋಷಕರು ವಾನಪ್ರಸ್ಥಕ್ಕೆ ಪ್ರವೇಶಿಸುತ್ತಾರೆ ಮತ್ತು ಅವರು ಲೋಕಹಿತ ಬಯಸುವ ಸಂನ್ಯಾಸಿಗಳಿಗೆ ಆಶ್ರಯ ಕೊಡುವವರೂ ಆಗಿರುತ್ತಾರೆ. ವಾನಪ್ರಸ್ಥದ ಅವಧಿಯಲ್ಲಿ ಮಕ್ಕಳು ಬೆಳೆದವರಾಗಿರುತ್ತಾರೆ ಮತ್ತು ಕೌಟುಂಬಿಕ ಜವಾಬ್ದಾರಿ ಕಡಿಮೆಯಾಗುತ್ತದೆ. ಸಾಮಾಜಿಕ ಹಿತದ ಕೆಲಸಗಳನ್ನು ಮಾಡಲು ಅವಕಾಶವಿರುತ್ತದೆ. ಈ ಅವದಿಯು ಕಿರಿಯರಿಗೆ, ಗೃಹಸ್ಥರಿಗೆ ಮತ್ತು ಸಂನ್ಯಾಸಿಗಳಿಗೆ ಬಲವಾದ ಆಧಾರರೂಪಿಯಾಗಿರಲು ಸೂಕ್ತವಾಗಿರುತ್ತದೆ. ಜ್ಞಾನವನ್ನು ಸಂಪಾದಿಸಿ ದೇಶಕ್ಕೆ, ಸಮಾಜಕ್ಕೆ ಉಪಕಾರಿಯಾಗಿರಬೇಕಾದ ಹಂತವಿದು. ಕೆಲವರು ನೇರವಾಗಿ ಸಂನ್ಯಾಸಾಶ್ರಮಕ್ಕೆ ಪ್ರವೇಶಿಸಿ ನಂತರದಲ್ಲಿ ಪ್ರಾಪಂಚಿಕ ಆಕರ್ಷಣೆಗಳಿಗೆ ಒಳಗಾಗಿ ಕೆಳಗೆ ಬಿದ್ದಿರುವುದನ್ನೂ ಕಂಡಿದ್ದೇವೆ. ಹಲವರು ಸಾಧು-ಸಂತರು, ಸ್ವಾ"ಗಳು, ಮಠಾಧೀಶರು ಪದತ್ಯಾಗ ಮಾಡಿ ಸಂಸಾರಿಗಳಾಗಿರುವುದನ್ನೂ ನೋಡಿದ್ದೇವೆ. ಇನ್ನು ಕೆಲವರು ಮರೆಯಲ್ಲಿ ಕಾಮವಾಂಛೆ ತೃಪ್ತಿಪಡಿಸಿಕೊಂಡವರು, ಗುಟ್ಟು ರಟ್ಟಾದಾಗ ಛೀಮಾರಿಗೆ ಒಳಗಾದವರನ್ನೂ ಕಂಡಿದ್ದೇವೆ. ಇಂತಹ ಸಂಯಮಿಗಳಲ್ಲದವರು ನೈಜ ವಾನಪ್ರಸ್ಥಿಗಳು, ಸಂನ್ಯಾಸಿಗಳಿಗೆ ಸಹ ಕೆಟ್ಟ ಹೆಸರು ಬರಲು ಮತ್ತು ಅವರುಗಳನ್ನು ಸಂಶಯದಿಂದ ನೋಡುವಂತೆ ಮಾಡಿರುವುದೂ ಸುಳ್ಳಲ್ಲ. ಹಾಗಾಗಿ ಗೃಹಸ್ಥ, ವಾನಪ್ರಸ್ಥದ ಅವಧಿಯನ್ನು ಪೂರ್ಣಗೊಳಿಸಿ ಪ್ರಾಪಂಚಿಕ ಆಕರ್ಷಣೆಗಳಿಂದ ಮುಕ್ತರಾದ ನಂತರವೇ ಸಂನ್ಯಾಸಿಗಳಾಗುವುದು ಸಮಾಜದ ಮತ್ತು ಸ್ವಂತದ ಹಿತದಿಂದ ಒಳ್ಳೆಯದು. ವಾನಪ್ರಸ್ಥಕ್ಕೆ ತೆರಳುವವರಿಂದ ಇನ್ನೊಂದು ಲಾಭವೂ ಇದೆ. ವೃದ್ಧರ ನಿವೃತ್ತಿಯಿಂದ ಯುವಕರಿಗೆ ಸಹಜವಾಗಿ ಅಧಿಕಾರ, ಸಾಧನ ಸೌಲಭ್ಯಗಳು ಸಿಗುತ್ತವೆ. ಅಥರ್ವ ವೇದದ ಈ ಮಂತ್ರ ಹೀಗೆ ಹೇಳುತ್ತದೆ:
ಆ ನಯೈತಮಾ ರಭಸ್ಯ ಸುಕೃತಾಂ ಲೋಕಮಪಿ ಗಚ್ಛತು ಪ್ರಜಾನನ್ |
ತೀರ್ತ್ವಾ ತಮಾಂಸಿ ಬಹುಧಾ ಮಹಾಂತ್ಯಜೋ ನಾಕಮಾ ಕ್ರಮತಾಂ ತೃತೀಯಮ್ || (ಅಥರ್ವ.೯.೫.೧.)
     ಅರ್ಥ: ಓ ಗೃಹಸ್ಥ! ಈ ನಿನ್ನ ಆತ್ಮನನ್ನು ಮುನ್ನಡೆಸು. ಸಾಧನೆಯನ್ನಾರಂಭಿಸು. ನಿನ್ನ ಆತ್ಮನು, ಚೆನ್ನಾಗಿ ಜ್ಞಾನ ಗಳಿಸಿ, ಪುಣ್ಯವಂತರ ಸ್ಥಿತಿಯನ್ನು ಮುಟ್ಟಲಿ. ಆಜನ್ಮನಾದ, ನಿತ್ಯನಾದ ನಿನ್ನ ಅತ್ಮನು ಅನ್ಯ ಸಾಧನೆಗಳಿಂದ, ಮಹಾ ಅಂಧಕಾರಗಳನ್ನು ದಾಟಿ, ಮೂರನೆಯದಾದ ವಾನಪ್ರಸ್ಥದ ಸುಖಮಯ ಆಶ್ರಮವನ್ನು ಆಕ್ರಮಿಸಲಿ.
ಸುಕ್ಕುಗಳು ಮೂಡಿಹವು ತಲೆಯು ನರೆತಿಹುದು
ಮುಪ್ಪು ಬಂದಡರಿ ಕೈಕಾಲು ನಡುಗಿಹುದು|
ರೋಗಗಳು ಮುತ್ತಿ ಬಳಲಿ ಬೆಂಡಾಗಿಹರು
ತೀರದಿಹ ಆಸೆಗೆ ಮುಪ್ಪಿಲ್ಲ್ಲವೋ ಮೂಢ|| 

     ಎಲ್ಲಾ ವಯೋವೃದ್ಧರಿಗೂ ಜೀವನದ ಅಂತಿಮ ದಿನಗಳನ್ನು ಪ್ರಾಪಂಚಿಕ ಆಕರ್ಷಣೆಗಳಿಂದ ದೂರವಾಗಿ ಕಳೆಯುವ ಮನಸ್ಸು ಬರಲಾರದು. ಒಂದು ಹಾಸ್ಯಪ್ರಸಂಗ ಇಲ್ಲಿ ನೆನಪಾಗುತ್ತಿದೆ. ಒಬ್ಬ ವ್ಯಾಪಾರಿ ಇನ್ನೇನು ಆಗಲೋ, ಈಗಲೋ ಎಂಬಂತೆ ಸಾಯುವ ಸ್ಥಿತಿಯಲ್ಲಿದ್ದಾಗ, ಅವನ ಹತ್ತಿರವಿರಲು ಮಗ ಮನೆಗೆ ಧಾವಿಸಿಬರುತ್ತಾನೆ. ಅವನಿಗೆ ಏನೋ ಹೇಳಬೇಕೆಂದು ಆ ವ್ಯಾಪಾರಿ ಬಯಸಿದರೂ ಗಂಟಲಿನಿಂದ ಸ್ವರ ಹೊರಡದೆ ಗೊರಗೊರ ಶಬ್ದ ಬರುತ್ತಿದೆ. ವೈದ್ಯರ ಶತಪ್ರಯತ್ನದಿಂದ ಕೊನೆಗೆ ಮಾತನಾಡಿದ ಅವನು ಮಗನಿಗೆ "ಇಷ್ಟು ಬೇಗ ಏಕೆ ಅಂಗಡಿ ಬಾಗಿಲು ಹಾಕಿದೆ?" ಎಂದು ಕೇಳಿದ್ದೇ ಅವನ ಜೀವನದ ಕೊನೆಯ ಮಾತಾಗಿತ್ತು! ಗೋಂದಾವಲೀ ಮಹಾರಾಜರು ಉಪನ್ಯಾಸವೊಂದರಲ್ಲಿ ಹೇಳಿದ ಪ್ರಸಂಗ (ಧ್ವನಿಮುದ್ರಿಕೆಯಲ್ಲಿ ಕೇಳಿದ್ದು) ಇಲ್ಲಿ ಉಲ್ಲೇಖಿಸಬಹುದು. ಒಬ್ಬ ಭಕ್ತರ ಮನೆಗೆ ಅವರು ಹೋಗಿದ್ದಾಗ ಆ ಮನೆಯಲ್ಲಿದ್ದ 90 ವರ್ಷ ದಾಟಿದ್ದ ವೃದ್ಧೆಯೊಬ್ಬರು ಅವರನ್ನು ಉದ್ದೇಶಿಸಿ, "ಸ್ವಾಮಿ, ನನಗೆ ಇನ್ನು ಯಾವ ಆಸೆಯೂ ಇಲ್ಲ. ನಿಮ್ಮ ಪಾದದ ಕೆಳಗೆ ತಲೆಯಿಟ್ಟು ಈ ಜೀವನ ಮುಗಿಸಬೇಕು ಎಂಬುದೊಂದೇ ಆಸೆ" ಎಂದಳು. ಅದಕ್ಕೆ ಅವರು, "ಆಗಲಿ, ಅದಕ್ಕೇನಂತೆ? ಹಾಗೇ ಮಾಡಿ" ಎಂದು ಚಕ್ಕಳ ಮಕ್ಕಳ ಹಾಕಿಕೊಂಡು ಕುಳಿತಾಗ ಗಾಬರಿಯಾದ ಆ ವೃದ್ಧೆ, "ಅಯ್ಯೋ, ಸ್ವಾಮಿ, ಈಗಲೇ ಅಲ್ಲ. ನನ್ನ ಮೊಮ್ಮಗಳ ಮದುವೆ ಆಗಬೇಕು. ಅವಳ ಮಗುವನ್ನು ಎತ್ತಿ ಮುದ್ದಾಡಬೇಕು. ನಾಮಕರಣ ಆಗಬೇಕು. ನಂತರ ನನ್ನ ಈ ಆಸೆ ಈಡೇರಿಸಿಕೊಳ್ಳುತ್ತೇನೆ" ಅಂದಳಂತೆ! ಸಾಯುವ ಕೊನೆಯ ಕ್ಷಣದವರೆಗೂ ರಾಜಕೀಯ ಮಾಡುತ್ತಾ ಅಧಿಕಾರಕ್ಕಾಗಿ ಹಪಹಪಿಸುವ ಇಂದಿನ ರಾಜಕಾರಣಿಗಳೂ ಇದೇ ವರ್ಗಕ್ಕೆ ಸೇರಿದವರು. ಹಾಗಾಗಿ ಏನು ಬದಲಾವಣೆ ನಿರೀಕ್ಷಿಸಲಾದೀತು? ಇರಲಿ ಬಿಡಿ, ವಾನಪ್ರಸ್ಥ ಬಯಸದವರ ಮಾತನ್ನು ಮುಂದುವರೆಸುವುದಿಲ್ಲ.
ವಿರಾಗದಲಿ ಮನೆಯ ತೊರೆಯಬೇಕಿಲ್ಲ
ತಪವನಾಚರಿಸೆ ವನವನರಸಬೇಕಿಲ್ಲ |
ನಿಷ್ಕಾಮಕರ್ಮದ ನಿಜಮರ್ಮವನರಿಯೆ
ಅದುವೆ ವಿರಾಗ ಅದುವೆ ತಪ ಮೂಢ || 

     ಇಂದಿನ ಕಾಲಮಾನದ ಪರಿಸ್ಥಿತಿಯಲ್ಲಿ ವಾನಪ್ರಸ್ಥದ ಮೂಲ ಪರಿಕಲ್ಪನೆಯನ್ನು ಸೂಕ್ತವಾಗಿ ಪರಿವರ್ತಿಸಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. 45-50ರ ವಯಸ್ಸಿನಲ್ಲಿ ಇರುವವರು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಮುಂಚಿತವಾಗಿ ಯೋಜನೆ ಮಾಡಿಕೊಂಡು, ಮಾನಸಿಕವಾಗಿ ಸಿದ್ಧರಾಗಿದ್ದಲ್ಲಿ ನಿವೃತ್ತರಾದ ಕೂಡಲೇ ಉಂಟಾಗಬಹುದಾದ ಶೂನ್ಯಭಾವದಿಂದ ಹೊರಬರಬಹುದು. ನಿವೃತ್ತ ಜೀವನವನ್ನು ಒಳ್ಳೆಯ ರೀತಿಯಲ್ಲಿ ಕಳೆಯುವ ಸಾಧನವಾಗಿ ಮಾಡಿಕೊಳ್ಳುವುದನ್ನು ವಾನಪ್ರಸ್ಥವೆನ್ನೋಣ. ಪ್ರತಿಯೊಂದರಲ್ಲಿ, ಪ್ರತಿಯೊಬ್ಬರಲ್ಲಿ ಒಳಿತನ್ನು ಕಾಣುವ ಮನೋಭಾವ ಬೆಳೆಸಿಕೊಂಡು, ಅಂತರಂಗ, ಬಹಿರಂಗಗಳಲ್ಲಿ ಸಾಮ್ಯತೆ ಸಾಧಿಸುವ ಕ್ರಿಯೆಯಲ್ಲಿ ತೊಡಗುವುದು ಕಡಿಮೆ ಸಾಧನೆಯಲ್ಲ. ಪ್ರಾಪಂಚಿಕ ಆಕರ್ಷಣೆಗಳಿಂದ ವಿಮುಕ್ತರಾಗಿ ಸರಳ ವಸ್ತ್ರಗಳನ್ನು ಧರಿಸಿ, ಸರಳ ಜೀವನವನ್ನು ನಡೆಸಿ ಆತ್ಮಚಿಂತನೆಯಲ್ಲಿ ತೊಡಗಬಹುದಾಗಿದೆ. ತನ್ನ ಚಿಂತನೆ, ಜ್ಞಾನಾಭಿವೃದ್ಧಿಗಳಿಗೆ ಪೂರಕವಾಗುವ ಸತ್ಸಂಗಗಳಲ್ಲಿ ಪಾಲುಗೊಳ್ಳುವುದು, ಅಂತಹ ಆದರ್ಶದ ಜೀವನ ಸಾಗಿಸುತ್ತಿರುವ ಧೀಮಂತರ ಮಾರ್ಗದರ್ಶನ ಪಡೆಯುವುದು ಸಹಕಾರಿಯಾಗುತ್ತದೆ. ಇಂತಹವರು ಸಹಜವಾಗಿ ದೇಶಾತೀತ, ಭಾಷಾತೀತ, ಜನಾಂಗಾತೀತ, ಮತಾತೀತ ಮಾನವರಾಗುತ್ತಾರೆ. ಕೌಟುಂಬಿಕ ಜವಾಬ್ದಾರಿಗಳನ್ನು ಮಕ್ಕಳಿಗೆ ವಹಿಸಿ ನಿರ್ಲಿಪ್ತ, ನಿಶ್ಚಿಂತರಾಗುವುದು ಮೊದಲ ಕ್ರಮವಾಗಬೇಕು. ನಂತರದಲ್ಲಿ ಸಾಧ್ಯವಾದಷ್ಟು ಪ್ರಶಾಂತ ಕೊಠಡಿ ಅಥವ ಸ್ಥಳದಲ್ಲಿ ಇರಬೇಕು. ಕುಟುಂಬದವರು ಕೌಟುಂಬಿಕ ಸಮಸ್ಯೆ ಅಥವ ವಿಚಾರಗಳಿಗೆ ಸಲಹೆ, ಸಹಕಾರ ಬಯಸಿದಲ್ಲಿ ಕೊಡಬೇಕು. ಆದರೆ ಅವುಗಳಲ್ಲಿ ವ್ಯಸ್ತರಾಗಬಾರದು. ಕೌಟುಂಬಿಕ ಸಾಮರಸ್ಯ, ಬಂಧುಗಳ ಸಾಮರಸ್ಯ, ಜನಾಂಗದ ಸಾಮರಸ್ಯ, ಸಕಲ ಜೀವಕೋಟಿಯ ಸಾಮರಸ್ಯದ ಗುರಿಯಿರಬೇಕು. ಈ ದಿಸೆಯಲ್ಲಿ ಎಷ್ಟು ಸಾಧಿಸಲು ಸಾಧ್ಯ, ಸಾಧಿಸಿದೆವು ಎಂಬುದು ಮಹತ್ವದ್ದಲ್ಲ. ಒಂದು ಗಾದೆಯಿದೆ, ಸಾವಿರ ಮೈಲುಗಳ ಪಯಣ ಪ್ರಾರಂಭವಾಗುವುದು ಒಂದು ಹೆಜ್ಜೆ ಮುಂದಿಡುವುದರಿಂದ. ಸಣ್ಣ ಕೌಟುಂಬಿಕ ವ್ಯಾಪ್ತಿಯಿಂದ ಹೊರಬಂದು ವಿಶ್ವವೇ ಒಂದು ಕುಟುಂಬವಾಗಿದ್ದು ತಾನು ಅದರ ಭಾಗವೆಂದು ಭಾವಿಸುವ ಮನೋವೃತ್ತಿ ಬೆಳೆಸಿಕೊಳ್ಳಬೇಕು. ಸರ್ವರ ಹಿತ ಬಯಸುವ ಕೆಲಸ, ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು, ಬೆಂಬಲಿಸಬೇಕು. ಮನೋವಿಕಾರಗಳನ್ನು ನಿಯಂತ್ರಿಸಲು ಸಾಧನೆ ನಡೆಸಬೇಕು. ದುಷ್ಟ ವಿಚಾರಗಳಿಂದ ದೂರವಿದ್ದು, ಸದ್ವಿಚಾರಗಳ ಅನುಸರಣೆ, ಪ್ರಸರಣೆಗೆ ಗಮನ ಕೊಡಬೇಕು. ಒಳಿತನ್ನು, ಒಳ್ಳೆಯ ಸಂಗತಿಗಳನ್ನು ಗುರುತಿಸಿ ಗೌರವಿಸಬೇಕು. ಸಾಧ್ಯವಾದಷ್ಟೂ ಇತರರಿಗೆ ಹೊರೆಯಾಗದಂತೆ ಬಾಳಬೇಕು.
ಫಲವ ಬಯಸದೆ ಮಾಡುವನು ಕರ್ಮ
ಸಮಚಿತ್ತದೆಸಗಿದ ಮಮರಹಿತ ಕರ್ಮ |
ರಾಗ ರೋಷಗಳ ಸೋಂಕಿರದ ಕರ್ಮ
ಕರ್ಮಯೋಗಿಯ ಮರ್ಮವಿದುವೆ ಮೂಢ || 
     ಸಾಮಾನ್ಯವಾಗಿ ಒಬ್ಬೊಬ್ಬರಿಗೆ ಒಂದೊಂದು ವೃತ್ತಿ, ಪ್ರವೃತ್ತಿ, ಹವ್ಯಾಸಗಳು ತೃಪ್ತಿ, ಸಂತೋಷ ಕೊಡುವ ಸಂಗತಿಯಾಗಿರುತ್ತದೆ. ನಿವೃತ್ತಿಯೆಂದರೆ ಅಂತಹ ಹವ್ಯಾಸಗಳನ್ನು ನಿಲ್ಲಿಸುವುದಲ್ಲ. ಬದಲಾಗಿ ಅವುಗಳನ್ನು ಇತರರ ಹಿತಕ್ಕಾಗಿ ಬಳಸುವುದು. ಆದರೆ ಅದು ಹಣಗಳಿಕೆಯ ಸಾಧನವಾಗಬಾರದಷ್ಟೆ. ಒಬ್ಬ ನಿವೃತ್ತ ಶಿಕ್ಷಕ ಬಡ ಮಕ್ಕಳಿಗೆ ಉಚಿತವಾಗಿ ಪಾಠ ಹೇಳಬಹುದು, ಸಂಗೀತಗಾರ ತನ್ನ ಸಾಧನೆಯನ್ನು ಉತ್ತುಂಗಕ್ಕೇರಿಸುವುದರ ಜೊತೆಗೆ ಇತರರಿಗೆ ಸಂಗೀತ ಹೇಳಿಕೊಡಬಹುದು, ಬರಹಗಾರ ತನ್ನ ಅನುಭವದ ಸಾರಗಳನ್ನು ಬರಹದ ಮೂಲಕ ಅಭಿವ್ಯಕ್ತಿಸಬಹುದು ಮತ್ತು ಆ ಮೂಲಕ ಪರಿಣಾಮ ಬೀರಬಹುದು. ಇವೆಲ್ಲಾ ಉದಾಹರಣೆಗಳಷ್ಟೆ. ಕೇವಲ ಆತ್ಮತೃಪ್ತಿ ಮತ್ತು ಇತರರಿಗೆ ಮಾರ್ಗದರ್ಶಿಯಾಗಿರಲು ಮಾತ್ರ ಇವುಗಳ ಬಳಕೆಯಾಗಬೇಕು. ಪಡೆಯುವುದಕ್ಕಿಂತ ಕೊಡುವುದಕ್ಕೆ ಆದ್ಯತೆಯಿರಬೇಕು. ಅಷ್ಟಕ್ಕೂ ನಮ್ಮಲ್ಲಿರುವುದೆಲ್ಲಾ ನಾವು ಪಡೆದಿದ್ದೇ ಅಲ್ಲವೇ? ಬದುಕಿನ ಜಂಜಾಟದಲ್ಲಿ ತನ್ನತನಕ್ಕೆ ಅದುವರೆಗೆ ಸಿಕ್ಕದ ಆದ್ಯತೆಯನ್ನು ಜೀವನದ ಅಂತಿಮ ಘಟ್ಟದಲ್ಲಾದರೂ ಸಿಕ್ಕುವಂತೆ ನೋಡಿಕೊಂಡು 'ತಾನು ತಾನಾಗಿರಬೇಕು', ಅರ್ಥಾತ್ 'ತನಗಾಗಿ' ಬಾಳಬೇಕು. 'ತನಗಾಗಿ' ಬಾಳುವ ಈ ರೀತಿಯ ಬಾಳು"ಕೆಯಲ್ಲಿ ಸ್ವಾರ್ಥವಿರಲಾರದು. ಏಕೆಂದರೆ, ಅದು ಆತ್ಮತೃಪ್ತಿಯ, ಆತ್ಮ ಚಿಂತನೆಯ, ಆತ್ಮಾನುಸಂಧಾನದ ಮಾರ್ಗ. ಒಂದು ರೀತಿಯಲ್ಲಿ ಅದು ಹಿಂದೆ ಮಾಡಿರಬಹುದಾದ ತಪ್ಪುಗಳಿಗೆ ಪ್ರಾಯಶ್ಚಿತ್ತವೂ ಆದೀತು. ಇಂತಹ ಚಿಂತನೆಗಳನ್ನು ಹೊಂದಿದವರ ಭಾವನೆಯನ್ನು ಗೌರವಿಸಿ ಸಹಕರಿಸುವ ಕುಟುಂಬದ ಇತರ ಸದಸ್ಯರೂ ಅಭಿನಂದನಾರ್ಹರಾಗುತ್ತಾರೆ. ಇಂತಹ ಕ್ರಿಯೆಯಿಂದ ಯುವಕರಿಗೆ ಸಹಜವಾಗಿ ನಾಯಕತ್ವ ಸಿಗುವುದಲ್ಲದೇ, ಅವರಿಗೆ ಸುಯೋಗ್ಯ ಮಾರ್ಗದರ್ಶನ ಸಹ ನೀಡಿದಂತಾಗುತ್ತದೆ. 'ಯಾರಂತೆ ಅಂದರೆ ಊರಂತೆ' ಎಂದುಕೊಂಡು ಅದುವರೆಗೆ ಹೇಗೆ ಹೇಗೋ ಸಾಗಿಸಿದ ಜೀವನವನ್ನು ಮರೆತು, ಮೌಲ್ಯಗಳನ್ನು ಕಡೆಗಣಿಸಿ ಬಾಳಿದ ಹಿಂದಿನ ದಿನಗಳನ್ನು ಮರೆತು, ಕಷ್ಟವಾದರೂ ಸರಿ, ಜೀವನದ ಉಳಿದ ಕೊನೆಯ ದಿನಗಳಲ್ಲಿ ಮೌಲ್ಯಗಳಿಗೆ ಅಂಟಿಕೊಂಡು ಬಾಳಿದರೆ ಅದು ಜೀವಕೋಟಿಗೆ ನೀಡುವ, ಭಗವಂತ ಮೆಚ್ಚುವ ಅತಿ ದೊಡ್ಡ ಕಾಣಿಕೆಯಾಗುತ್ತದೆ.
-ಕ.ವೆಂ.ನಾಗರಾಜ್.
**************
29.10.2014ರ ಜನಹಿತ ಪತ್ರಿಕೆಯ 'ಜನಕಲ್ಯಾಣ' ಅಂಕಣದಲ್ಲಿ ಪ್ರಕಟಿತ:

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ