ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಬುಧವಾರ, ಆಗಸ್ಟ್ 9, 2017

ಶ್ರದ್ಧೆಯಿಂದ ಮಾಡುವುದೇ ಶ್ರಾದ್ಧ


     ಶ್ರಾದ್ಧ ಎಂದರೆ ಸಾಮಾನ್ಯವಾಗಿ ಮೃತರ ಆತ್ಮಕ್ಕೆ ಸದ್ಗತಿ ಕೋರಿ ಮಾಡುವ ಕ್ರಿಯೆ ಎಂದು ಅರ್ಥೈಸುತ್ತಾರೆ. ಆದರೆ ಶ್ರಾದ್ಧವೆಂದರೆ ಶ್ರದ್ಧೆಯಿಂದ ಮಾಡುವ ಯಾವುದೇ ಕೆಲಸ ಎಂದಷ್ಟೇ ಅರ್ಥ. ಶಿಕ್ಷಕ, ನೌಕರ, ಅಧಿಕಾರಿ, ಕೃಷಿಕ, ವಿದ್ಯಾರ್ಥಿ, ವ್ಯಾಪಾರಿ, ಯಾರೇ ಆಗಿರಲಿ, ಜವಾಬ್ದಾರಿಗಳನ್ನು ಅರಿತು ತಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಅದೇ ಶ್ರಾದ್ಧ. ಇರಲಿ ಬಿಡಿ, ಸಾಮಾನ್ಯ ಅರ್ಥದಲ್ಲಿ ಬಳಸುವ ಶ್ರಾದ್ಧದ ಬಗ್ಗೆ ಚಿಂತಿಸೋಣ. ಸನಾತನ ಧರ್ಮದಲ್ಲಿ ಹೇಳಿರುವ ಷೋಡಶ ಸಂಸ್ಕಾರಗಳಲ್ಲಿ ಅಂತ್ಯ ಸಂಸ್ಕಾರವೇ ಕೊನೆಯ ಸಂಸ್ಕಾರವಾಗಿದೆ. ಅಂತ್ಯ ಸಂಸ್ಕಾರವನ್ನು ಹಲವರು ಹಲವು ರೀತಿಯಲ್ಲಿ ಮಾಡುತ್ತಾರೆ. ಸಂಪ್ರದಾಯಕ್ಕೆ ತಕ್ಕಂತೆ ಕೆಲವರು ಹೂಳುತ್ತಾರೆ, ಕೆಲವರು ಸುಡುತ್ತಾರೆ, ಕೆಲವರು ಶವಪೆಟ್ಟಿಗೆಗಳಲ್ಲಿಡುತ್ತಾರೆ, ಕೆಲವರು ನದಿಯಲ್ಲಿ ತೇಲಿಬಿಡುತ್ತಾರೆ, ಕೆಲವರು ಹದ್ದುಗಳಿಗೆ ಆಹಾರವಾಗಿಸುತ್ತಾರೆ. ವೇದವು 'ಭಸ್ಮಾಂತಂ ಶರೀರಮ್||' [ಯಜು.೪೦.೧೫]-(ಶರೀರವು ಬೂದಿಯಲ್ಲಿ ಕೊನೆಯಾಗುತ್ತದೆ) ಎನ್ನುತ್ತದೆ. ಮೃತ ಶರೀರವನ್ನು ದಹನದ ಮೂಲಕ ಪಂಚಭೂತಗಳಲ್ಲಿ ಲೀನವಾಗಿಸುವುದು ವೈಜ್ಞಾನಿಕವಾಗಿ ಸೂಕ್ತವೆನಿಸುತ್ತದೆ. ಸತ್ತವರನ್ನೆಲ್ಲಾ ಹೂಳುತ್ತಾ ಹೋದರೆ ಸ್ಮಶಾನಗಳಿಗಾಗಿ ಹೆಚ್ಚು ಹೆಚ್ಚು ಭೂಮಿಯ ಅಗತ್ಯ ಬೀಳುತ್ತದೆ, ಪರಿಸರ ಮಾಲಿನ್ಯವಾಗುತ್ತದೆ. ನದಿಯಲ್ಲಿ ತೇಲಿಬಿಟ್ಟರೆ ಜಲಮಾಲಿನ್ಯ, ಪಕ್ಷಿಗಳಿಗೆ ಆಹಾರವಾಗಿಸಲು ಬಿಟ್ಟರೆ ವಾಯುಮಾಲಿನ್ಯವಾಗುತ್ತದೆ. ದಹನದ ಕಾಲದಲ್ಲಿ ಸೂಕ್ತ ಪ್ರಮಾಣದ ತುಪ್ಪ-ಸಾಮಗ್ರಿಗಳನ್ನು ಬಳಸಿದರೆ ದುರ್ಗಂಧದ ಹರಡುವಿಕೆ ಇಲ್ಲವಾಗುತ್ತದೆ. ಹಲವಾರು ಕಾರಣಗಳಿಗಾಗಿ ದಹನದ ಮೂಲಕ ಮಾಡುವ ಸಂಸ್ಕಾರವೇ ಸರಿಯೆಂಬ ವಾದ ಈಗ ವಿದೇಶಗಳಲ್ಲೂ ಕೇಳಿಬರುತ್ತಿದೆ.
     ಶ್ರಾದ್ಧ ಮಾಡುವುದು ಏಕೆ? ದೇಹದಲ್ಲಿ ಪ್ರಾಣವಿರುವವರೆಗೂ ವ್ಯಕ್ತಿಗೆ ಬೆಲೆ. ಪ್ರಾಣ ಹೋದ ತಕ್ಷಣದಲ್ಲಿ ಅದು ಹೆಣ. ಆತ್ಮವಿಲ್ಲದ ಶರೀರಕ್ಕೆ ಬೆಲೆಯಿಲ್ಲ. ಅದು ಕೇವಲ ಜಡವಸ್ತು. ಅದನ್ನು ಬೇಗ ಅಂತ್ಯಸಂಸ್ಕಾರ ಮಾಡಬೇಕಾಗುತ್ತದೆ. ಇಡೀ ಜಗತ್ತನ್ನೇ ಆಳಿದವನ ಹೆಣವೆಂದು ಅದನ್ನು ಯಾರಾದರೂ ಇಟ್ಟುಕೊಳ್ಳುತ್ತಾರೆಯೇ? ಮೃತ ಶರೀರವನ್ನು ದಹನ ಮಾಡಿಯೋ, ಯಾವುದೋ ರೀತಿಯಲ್ಲಿ ವಿಲೇವಾರಿ ಮಾಡಿದ ನಂತರದಲ್ಲಿ ಶ್ರಾದ್ಧಾದಿ ಕರ್ಮಗಳನ್ನು ಮಾಡಿದರೆ ಅದು ಶರೀರಕ್ಕಂತೂ ಅಲ್ಲ. ಇನ್ನು ಆತ್ಮಕ್ಕೆ ಸದ್ಗತಿ ಕೋರಿ ಮಾಡುವ ಕರ್ಮಗಳೆನ್ನಬಹುದೆ? ಆತ್ಮ ಅವಿನಾಶಿ, ಆದಿ, ಅಂತ್ಯವಿಲ್ಲದುದು, ಕರ್ಮಫಲಕ್ಕನುಸಾರವಾಗಿ ಜನನ-ಮರಣಗಳ ಚಕ್ರದಲ್ಲಿ ಸುತ್ತುತ್ತಿರುತ್ತದೆ ಎಂಬುದು ತಿಳಿದವರ ನುಡಿ. ಯಾವುದೇ ಜನ್ಮದಲ್ಲಿ ಯಾವುದೇ ಜೀವಿ ಜೀವಿತಾವಧಿಯಲ್ಲಿ ಗಳಿಸಿದ್ದನ್ನು, ಮನೆ, ಸಂಪತ್ತು, ಮಡದಿ, ಇತ್ಯಾದಿಗಳಿರಲಿ, ಕನಿಷ್ಠ ಧರಿಸಿದ್ದ ಬಟ್ಟೆಯನ್ನು ಸಾಯುವಾಗ ಹೊತ್ತೊಯ್ದುದನ್ನು ಯಾರೂ ಕಂಡಿಲ್ಲ. 'ನ ಕಿಲ್ಬಿಷಮತ್ರ ನಾಧಾರೋ ಅಸ್ತಿ ನ ಯನ್ಮಿತ್ರೈಃ ಸಮಮಮಾನ ಏತಿ| ಅನೂನಂ ಪಾತ್ರಂ ನಿಹಿತಂ ನ ಏತತ್ಪಕ್ತಾರಂ ಪಕ್ವಃ ಪುನರಾ ವಿಶಾತಿ||'  (ಅಥರ್ವ.೧೨.೩.೪೮) ದೇವರ ನ್ಯಾಯವಿಧಾನದಲ್ಲಿ ಯಾವ ದೋಷವೂ ಇಲ್ಲ. ಬೇರೆ ಯಾವ ಆಧಾರವೂ ಇಲ್ಲ. ಸ್ನೇಹಿತರ, ಬಂಧುಗಳ ಸಹಾಯದಿಂದ ಮೋಕ್ಷಕ್ಕೆ ಸೇರುತ್ತೇನೆ ಎಂಬುದೂ ಇಲ್ಲ. ಈ ಒಡಕಿಲ್ಲದ ಅಂತಃಕರಣದ ಪಾತ್ರೆಯಲ್ಲಿ ಬೇಯಿಸಿದ ಅನ್ನ, ಕರ್ಮಫಲವಿಪಾಕವು ಅಡಿಗೆ ಮಾಡಿದವನನ್ನು ಮರಳಿ ಪ್ರವೇಶಿಸಿಯೇ ತೀರುತ್ತದೆ ಎಂದು ಇದರ ಅರ್ಥ. ಮಾಡಿದ್ದುಣ್ಣೋ ಮಹರಾಯ! ಬೇರೊಬ್ಬರು ಶ್ರಾದ್ಧಾದಿ ಕರ್ಮಗಳ ಮೂಲಕ ಅದನ್ನು ಬದಲಾಯಿಸಲು ಸಾಧ್ಯವೇ? ನನಗೆ ಕಾಯಿಲೆ ಬಂದರೆ ಔಷಧಿಯನ್ನು ನಾನೇ ಕುಡಿಯಬೇಕು. ಬೇರೆ ಯಾರೋ ಕುಡಿದರೆ ನನ್ನ ಕಾಯಿಲೆ ಹೇಗೆ ವಾಸಿಯಾದೀತು? ಬದುಕಿದ್ದಾಗ ಏನು ಬೇಕಾದರೂ ಮಾಡಬಹುದು, ಸತ್ತ ನಂತರ ಮಕ್ಕಳು ಶ್ರಾದ್ಧ ಮಾಡಿಬಿಟ್ಟರೆ ಎಲ್ಲಾ ಸರಿಹೋಗುತ್ತದೆ ಎಂಬದು ಭ್ರಮೆ. ಮೃತ ಶರೀರವನ್ನು ಪಂಚಭೂತಗಳಲ್ಲಿ ವಿಲೀನಗೊಳಿಸುವ ಕ್ರಿಯೆಯೊಂದಿಗೆ ಅಂತ್ಯೇಷ್ಟಿಕರ್ಮ ಮುಗಿಯುತ್ತದೆ. ನಂತರದಲ್ಲಿ ಮಾಡುವ ಕ್ರಿಯೆಗಳು ಸಂಬಂಧಿಕರ ಮಾನಸಿಕ ಸಮಾಧಾನಕ್ಕಷ್ಟೇ ಸೀಮಿತವೆಂದರೆ ಕಠಿಣ ಮಾತಾಗುತ್ತದೆ.
     ತಲೆ ತಲಾಂತರಗಳಿಂದ ಹಿರಿಯರು ನಡೆಸಿಕೊಂಡು ಬರುತ್ತಿರುವ ಕ್ರಿಯೆಗಳಿಗೆ ಅರ್ಥವಿಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಶ್ರಾದ್ಧ ಮಾಡುವ ಮೂಲಕ ಹಿರಿಯರನ್ನು ನೆನೆಸಿಕೊಂಡು ಅವರು ಹಾಕಿಕೊಟ್ಟ ಉತ್ತಮ ರೀತಿಯ ಸಂಸ್ಕಾರಗಳನ್ನು ಮುಂದುವರೆಸಿಕೊಂಡು ಹೋಗಬಹುದು. ಅವರ ನೆನಪನ್ನು ಸ್ಥಾಯಿಯಾಗಿ ಉಳಿಯುವಂತೆ ಮಾಡಬಹುದು, ಅವರ ಅಪೂರ್ಣ ಉತ್ತಮ ಕೆಲಸಗಳನ್ನು ಪೂರ್ಣಗೊಳಿಸಬಹುದು. ಮೃತರ ನೆನಪಿನಲ್ಲಿ ಸಮಾಜಕ್ಕೆ ಹಿತವಾಗುವ ಕೆಲಸಗಳನ್ನು ಮಾಡಬಹುದು. ಅಂತ್ಯ ಸಂಸ್ಕಾರದ ಸಂದರ್ಭದಲ್ಲಿ ಮಾಡುವ ಮಂತ್ರೋಚ್ಛಾರಗಳಿಂದ ಮೃತ ಶರೀರಕ್ಕೆ ಯಾವುದೇ ಅನುಕೂಲವಾಗುವುದಿಲ್ಲ. ಅನುಕೂಲವಾಗುವುದೇನಾದರೂ ಇದ್ದರೆ ಅದು ಸಂಸ್ಕಾರ ಕಾರ್ಯ ನೆರವೇರಿಸುವವರಿಗೆ ಅಷ್ಟೆ. 'ಸಂ ಗಚ್ಛಸ್ವ ಪಿತೃಭಿಃ ಸಂ ಯಮೇನೇಷ್ಟಾಪೂರ್ತೇನ ಪರಮೇ ವ್ಯೋಮನ್| ಹಿತ್ವಾಯಾವದ್ಯಂ ಪುನರಸ್ತಮೇಹಿ ಸಂ ಗಚ್ಛಸ್ವ ತನ್ವಾ ಸುವರ್ಚಾಃ||' (ಋಕ್.೧೦.೧೪.೮.) ಓ ಜೀವ! ನಿನ್ನನ್ನು ಪಾಲಿಸುವವರೊಂದಿಗೆ, ಅಹಿಂಸಾ, ಸತ್ಯಾದಿ ವ್ರತಗಳೊಂದಿಗೆ, ಪ್ರಾಪ್ತ ಮತ್ತು ಪ್ರಾಪ್ಯ ಅಭಿಲಾಷೆಗಳೊಂದಿಗೆ, ಪರಮರಕ್ಷಕ ಪ್ರಭುವಿನಲ್ಲಿ ಆಶ್ರಯ ಪಡೆದುಕೋ. ಕೆಟ್ಟದ್ದನ್ನು ಬಿಟ್ಟು, ಮತ್ತೆ ಮನೆಗೆ ಹೋಗು. ಸುವರ್ಚಸ್ವಿಯಾಗಿ ಮುಂದೆ ಸಾಗು ಎಂಬ ಅರ್ಥದ ಈ ಮಂತ್ರ ಸತ್ತವರಿಗೋ, ಬದುಕಿರುವವರಿಗೋ?
     ಅಂತ್ಯ ಸಂಸ್ಕಾರದಲ್ಲಿ ಜೀವನದ ನಶ್ವರತೆ ಗೋಚರವಾಗುತ್ತದೆ. ಇರುವುದು ಮೂರು ದಿನ, ಅಷ್ಟರಲ್ಲಿ ಚಿರಂಜೀವಿಗಳಂತೆ ವರ್ತಿಸಿ, ಮಾಡಬಾರದ್ದನ್ನೆಲ್ಲಾ ಮಾಡುತ್ತೇವಲ್ಲಾ ಎಂಬ ಅರಿವು ಮೂಡುತ್ತದೆ. ಅರ್ಥಪೂರ್ಣವಾಗಿ ಬಾಳೋಣವೆಂಬ ಭಾವನೆ ಬರಿಸುತ್ತದೆ. ಇದನ್ನು ಸ್ಮಶಾನ ವೈರಾಗ್ಯವೆನ್ನುತ್ತಾರೆ. ಇದು ಹೆಚ್ಚು ಕಾಲ ಇರುವುದಿಲ್ಲ. ನಾಯಿಬಾಲದ ಡೊಂಕಿನಂತೆ ಹಿಂದಿನ ಜೀವನದಲ್ಲಿ ತೊಡಗಿಕೊಳ್ಳುತ್ತೇವೆ.
     ಜನರಲ್ಲಿ ಮೋಕ್ಷದ ಬಗ್ಗೆ ತಮ್ಮದೇ ಆದ ಕಲ್ಪನೆಗಳಿವೆ. ಬೈಬಲ್ಲಿನ ಪ್ರಕಾರ ದೇವರನ್ನು ನಂಬುವವರಿಗಾಗಿ  ಒಂದು ಹೊಸ ಸೃಷ್ಟಿ, ಹೊಸ ನಗರ, ಹೊಸ ಸಮುದಾಯವೇ ಹೊಸ ಸಂವಿಧಾನದಂತೆ ನಿರ್ಮಾಣವಾಗಿರುತ್ತದೆ. ಆ ಸ್ವರ್ಗವು ಕಣ್ಣು ಕಾಣದಿದ್ದ, ಕಿವಿಗೆ ಕೇಳದಿದ್ದ, ಕಲ್ಪನೆಗೆ ಎಟುಕದಿದ್ದ ರೀತಿಯಲ್ಲಿ ಇದ್ದು, ಅದರಲ್ಲೂ ಮೂರು ರೀತಿಯ ಸ್ವರ್ಗಗಳಿರುತ್ತವೆ ಎನ್ನುತ್ತದೆ (Revelation chapter 21). ಕುರಾನಿನ ಪ್ರಕಾರ ಸ್ವರ್ಗಸದೃಶ ತೋಟದಲ್ಲಿ ದೇವರನ್ನು ನಂಬುವ, ಅವನು ತೋರಿಸಿದ ಮಾರ್ಗದಲ್ಲಿ ನಡೆಯುವವರಿಗೆ ಅವರು ಬಯಸಿದ ಎಲ್ಲಾ ಸುಖ ಸಂಪತ್ತುಗಳೂ ಶಾಶ್ವತವಾಗಿ ಸಿಗುತ್ತವೆ. ದೇವರನ್ನು ನಂಬದವರಿಗೆ ಚಿತ್ರ ವಿಚಿತ್ರ ಶಿಕ್ಷೆಗಳನ್ನು ಕೊಡುವ ನರಕಗಳ ವರ್ಣನೆಗಳೂ ಬೈಬಲ್ ಮತ್ತು ಕುರಾನುಗಳಲ್ಲಿವೆ. ಹಿಂದೂಗಳಲ್ಲಿಯೂ ತಮ್ಮದೇ ಆದ ಭ್ರಾಂತ ಕಲ್ಪನೆಗಳಿವೆ. ತಮ್ಮ ಧಾರ್ಮಿಕ ನಂಬಿಕೆಗಳಿಗೆ ಅನುಸಾರವಾಗಿ ಸತ್ತ ಮೇಲೆ ಕೈಲಾಸವನ್ನೋ, ವೈಕುಂಠವನ್ನೋ, ಇನ್ನು ಯಾವುದೋ ದೇವರ ಆವಾಸಸ್ಥಾನವನ್ನೋ ಸೇರುತ್ತಾರೆ ಎಂದು ನಂಬುತ್ತಾರೆ. ಅಲ್ಲಿ ಹೋಗಿಬಿಟ್ಟರೆ ಆನಂದದಿಂದ ಇದ್ದುಬಿಡಬಹುದು ಎಂದು ಭಾವಿಸುತ್ತಾರೆ. ನರಕದ ವರ್ಣನೆಗಳೂ ಕಾಣಸಿಗುತ್ತವೆ. ಗರುಡಪುರಾಣದಲ್ಲಂತೂ ಪಾಪಿಗಳಿಗೆ ಕೊಡುವ ಭೀಭತ್ಸ ಶಿಕ್ಷೆಗಳ ವರ್ಣನೆಯ ಸರಮಾಲೆಯೇ ಇದೆ. ಈ ಧರ್ಮಗ್ರಂಥಗಳು, ಪುರಾಣಗಳಲ್ಲಿ ಬರುವ ಸ್ವರ್ಗ-ನರಕಗಳ ವಿವರಣೆಗಳು ಮಾನವರು ಧರ್ಮಮಾರ್ಗದಲ್ಲಿ ನಡೆಯಬೇಕೆಂಬ ಕಾರಣಗಳಿಗಾಗಿ ಹೊರತು ಮತ್ತೇನೂ ಅಲ್ಲ.
     ಹಾಗಾದರೆ ಶ್ರಾದ್ಧ ಹೇಗೆ ಮಾಡಬೇಕು? ಹಿರಿಯರು ಬದುಕಿದ್ದಾಗ ಶ್ರದ್ಧೆಯಿಂದ, ಗೌರವದಿಂದ ನೋಡಿಕೊಳ್ಳುವುದೇ ನಿಜವಾದ ಶ್ರಾದ್ಧ. ಜೀವಂತವಿದ್ದಾಗ ಕೀಳಾಗಿ ಕಂಡು, ಸರಿಯಾಗಿ ನೋಡಿಕೊಳ್ಳದೆ, ಸತ್ತಾಗ ವಿಜೃಂಭಣೆಯಿಂದ ತಿಥಿ ಮಾಡಿದರೆ ಪ್ರಯೋಜನವೇನು? ಭೂತ-ಪ್ರೇತವಾಗಿ ಕಾಡಿಯಾರೆಂಬ ಭಯದಿಂದ ಕ್ರಿಯೆಗಳನ್ನು ಮಾಡುವವರಿರುತ್ತಾರೆ. ನಂಬಿಕೆಯಿಲ್ಲದಿದ್ದವರೂ ಲೋಕಾಪವಾದದ ಭಯದಿಂದ ಮಾಡುವವರಿರುತ್ತಾರೆ. ಮಾಡಿದರೆ ಕಳೆದುಕೊಳ್ಳುವುದೇನೆಂದು ಮಾಡುವವರೂ ಸಿಗುತ್ತಾರೆ. ಪಿತೃಋಣವನ್ನು ತೀರಿಸುವುದೆಂದರೆ ನಮ್ಮ ಹುಟ್ಟಿಗೆ ಮಾಧ್ಯಮಗಳಾದವರಿಗೆ, ಪ್ರೌಢಾವಸ್ಥೆಗೆ ಬರುವವರೆಗೂ ಮತ್ತು ನಂತರದಲ್ಲೂ ಎಲ್ಲಾ ರೀತಿಯ ಸೇವೆ ಮಾಡಿ, ಪಾಲಿಸಿ, ಪೋಷಿಸಿದವರಿಗೆ ಪ್ರತಿಯಾಗಿ ಅವರ ಸೇವೆಯನ್ನು ಮಾಡುತ್ತಾ ಸಂತೋಷದಿಂದ ಇರುವಂತೆ ನೋಡಿಕೊಳ್ಳುವುದು. ಸತ್ತ ನಂತರ ಮಾಡುವ ಕ್ರಿಯಾಕರ್ಮಗಳಲ್ಲ, ಬದುಕಿದ್ದಾಗ ಸಲ್ಲಿಸಬೇಕಾದ ಸೇವೆಯಾಗಿದೆ. ನಿಜವಾದ ಶ್ರಾದ್ಧವೆಂದರೆ ಇದೇ! ತಲೆ ತಲಾಂತರಗಳಿಂದ ನಡೆದುಕೊಂಡು ಬರುತ್ತಿರುವ ಸಾಂಪ್ರದಾಯಿಕ ಕ್ರಿಯೆಗಳನ್ನು ಅರ್ಥಪೂರ್ಣವಾಗಿಸುವತ್ತ ಮುನ್ನಡೆಸುವುದು ಪ್ರಜ್ಞಾವಂತರ ಕರ್ತವ್ಯ. ವಿಚಾರ ಮಾಡೋಣ.
-ಕ.ವೆಂ.ನಾಗರಾಜ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ